ರಾಜ್ಯ ಬಜೆಟ್ನಲ್ಲಿ ಉತ್ತಮ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು, ದಲಿತರು, ಯುವಜನರು, ಕೈಗಾರಿಕೋದ್ಯಮಿಗಳು ಹಾಗೂ ವ್ಯಾಪಾರ ಕ್ಷೇತ್ರದ ಹಿತವನ್ನು ಕಾಯುವಲ್ಲಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ತಿಳಿಸಿದ್ದಾರೆ.
ರಾಜ್ಯದ ಆರ್ಥಿಕ ಸುಸ್ಥಿತಿಯ ಮಿತಿಯನ್ನು ಮೀರದೆ ಎಲ್ಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಒಳಗೊಂಡಿದ್ದಾರೆ. ರಾಜ್ಯದ ಜಿಡಿಪಿ ಶೇ. 8.1 ರಷ್ಟು ನೈಜ ಬೆಳವಣಿಗೆ ಸಾಧಿಸಿರುವುದು ಎಲ್ಲಾ ಕ್ಷೇತ್ರಗಳಲ್ಲೂ ಸಮತೋಲಿತ ಅಭಿವೃದ್ಧಿ ಕಂಡುಬರುತ್ತಿರುವುದಕ್ಕೆ ಉದಾಹರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಸುಮಾರು 56,432 ಹುದ್ದೆಗಳ ಭರ್ತಿಗೆ ಬದ್ಧತೆ ತೋರಿರುವುದು ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಅಭಿಪ್ರಾಯಪಟ್ಟರು.
ಶಿಕ್ಷಣ ಕ್ಷೇತ್ರದಲ್ಲಿಯೂ ಗಮನಾರ್ಹ ಬದಲಾವಣೆಗಳನ್ನು ತರಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಉನ್ನತೀಕರಣ ಶೈಕ್ಷಣಿಕ ಪ್ರಗತಿಗೆ ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕಿನಲ್ಲಿ ಆರ್ಥಿಕ ಸ್ಥಿರತೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಸುಸ್ಥಿರ (Sustainable) ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂ. ಶ್ರೀಕಾಂತ್ ರವರು ಅಭಿನಂದನೆಗಳು ತಿಳಿಸಿದ್ದಾರೆ.


